ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಜವಾಬ್ದಾರಿಯುತ ಹಾಗೂ ಸಂವೇದನಾಶೀಲ ಕೆಲಸವಾಗಿದ್ದು, ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಎಸ್ಐಆರ್ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ಪ್ರತಿಯೊಬ್ಬ ಬಿಎಲ್ಒ ಕಾರ್ಯವೈಖರಿಯನ್ನು ಸಾಫ್ಟ್ವೇರ್ ಮೂಲಕ ಸೂಕ್ಷ್ಮವಾಗಿ ಗಮನಿಸುತ್ತಿರುತ್ತದೆ. ಕೆಲಸದ ತೀವ್ರತೆ ಹಾಗೂ ಗಾಂಭೀರ್ಯತೆ ಪ್ರತಿಯೊಬ್ಬರಿಗೂ ಇರಬೇಕು. ಯಾರಾದರೂ ಕೆಲಸ ಮಾಡಲು ನಿರಾಕರಿಸಿದರೆ, ನಿರ್ಲಕ್ಷ್ಯ ತೋರಿದರೆ ತಕ್ಷಣವೇ ಅವರನ್ನು ಅಮಾನತು ಮಾಡಿ, ಆ ಜಾಗಕ್ಕೆ ಮತ್ತೊಬ್ಬರನ್ನು ನೇಮಕ ಮಾಡಿ ಎಂದು ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ತಾಕೀತು ಮಾಡಿದರು.
ಮತದಾರರ ಪಟ್ಟಿಯಲ್ಲಿ ಸಣ್ಣ ವ್ಯತ್ಯಾಸವಾದರೂ ಒಬ್ಬ ನಾಗರಿಕನ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಅತ್ಯಂತ ಗಂಭೀರವಾದ ಅಪರಾಧ. ಕೆಲಸದಲ್ಲಿ ಏನಾದರೂ ಲೋಪದೋಷಗಳಾದರೆ ಬಿಎಲ್ಒ ಮಾತ್ರವಲ್ಲ, ನೇರವಾಗಿ ನೀವೇ ಹೊಣೆಯಾಗಬೇಕಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಣ್ಣ ತಪ್ಪು ದೊಡ್ಡ ಪರಿಣಾಮ ಬೀರುವುದರಿಂದ, ಪ್ರತಿಯೊಬ್ಬ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಸಕ್ರಿಯವಾಗಿ ಕೆಲಸ ಮಾಡುವವರನ್ನು ಬಿಎಲ್ಒಗಳಾಗಿ ನೇಮಕ ಮಾಡಬೇಕು. ಈ ಕುರಿತು ಜೂನ್ 5ರೊಳಗಾಗಿ ಎಲ್ಲಾ ಬಿಎಲ್ಒಗಳ ನೇಮಕಾತಿ ಕುರಿತು ಕಡ್ಡಾಯವಾಗಿ ದೃಢೀಕರಣ ಸಲ್ಲಿಸಬೇಕು. ಆಯಾ ವ್ಯಾಪ್ತಿಯ ಅಧಿಕಾರಿಗಳೇ ಜೂನ್ 6ರ ಒಳಗಾಗಿ ಬಿಎಲ್ಎ, ಬಿಎಲ್ಒ ಮತ್ತು ಸೂಪರ್ವೈಸರ್ಗಳಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ಈಗಾಗಲೇ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಗಿದೆ. ಅದೇ ಮಾದರಿಯಲ್ಲಿ ತಾಲೂಕು ಮಟ್ಟದಲ್ಲಿಯೂ ಇಆರ್ಒ ಮತ್ತು ಎಇಆರ್ಒಗಳ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆಯಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಮಾರ್ಗಸೂಚಿಗಳನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು ಹಾಗೂ ಅವರಲ್ಲಿ ಯಾವುದೇ ಗೊಂದಲಗಳಿದ್ದರೆ ತಕ್ಷಣವೇ ಬಗೆಹರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಮಾಸ್ಟರ್ ಟ್ರೈನರ್ ಎಸ್.ನಾಗಭೂಷಣ್ ಅವರು ಎಸ್ಐಆರ್ ಕುರಿತು ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಇಆರ್ಒಗಳಾದ ವೆಂಕಟೇಶ್ ನಾಯ್ಕ್, ಡಾ.ಕಾಂತರಾಜ್, ಚಂದ್ರಕುಮಾರ್, ರೇಷ್ಮ ಹಾನಗಲ್, ಎಇಆರ್ಒಗಳಾದ ಗೋವಿಂದರಾಜ್, ರೇಹಾನ್ ಪಾಷಾ, ಸಿದ್ದೇಶ್, ತಿರುಪತಿ ಪಾಟೀಲ್, ವಿಜಯ್ ಕುಮಾರ್, ಡಾ.ನಾಗವೇಣಿ, ಚುನಾವಣಾ ತಹಶೀಲ್ದಾರ್ ಬೀ ಬೀ ಫಾತಿಮಾ ಇದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
