ಚಿತ್ರದುರ್ಗ: ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ , ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ನೋಂದಣಿಯು ಅತ್ಯಂತ ನಿರಾಶಾದಾಯಕವಾಗಿದ್ದು, ಗುರಿ ತಲುಪುವಲ್ಲಿ ಬ್ಯಾಂಕುಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ) ಡಾ. ಆಕಾಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ಜರುಗಿದ ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾಜಿಕ ಭದ್ರತಾ ಯೋಜನೆಗಳ ನೊಂದಣಿಯಲ್ಲಿ ಜಿಲ್ಲೆಯ ಬ್ಯಾಂಕುಗಳ ಕಳಪೆ ಸಾಧನೆಯ ಬಗ್ಗೆ ರಾಜ್ಯ ಸಲಹಾ ಸಮಿತಿ ಸಭೆಯಲ್ಲಿ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ನಿಗದಿಪಡಿಸಿದ ಗುರಿಗಿಂತಲೂ ಬ್ಯಾಂಕುಗಳ ಸಾಧನೆ ತೀರಾ ಕೆಳಮಟ್ಟದಲ್ಲಿದೆ. ಕಡಿಮೆ ಸಾಕ್ಷರತೆ ಹಾಗೂ ಕಡಿಮೆ ತಲಾ ಆದಾಯ ಹೊಂದಿರುವ ರಾಜ್ಯದ ಇತರ ಜಿಲ್ಲೆಗಳು ಈ ಯೋಜನೆಗಳಡಿ ಹೆಚ್ಚಿನ ಪ್ರಗತಿ ಸಾಧಿಸಿವೆ. ಆದರೆ ಚಿತ್ರದುರ್ಗ ಜಿಲ್ಲೆಯು ಪಿಎಂ-ಜೆಜೆಬಿವೈ ಶೇ. 18 ಹಾಗೂ ಪಿಎಂ-ಎಸ್ಬಿವೈ ಶೇ.30 ರಷ್ಟು ಸಾಧನೆ ಮಾಡುವ ಮೂಲಕ ರಾಜ್ಯದಲ್ಲೇ ಕೊನೆಯ ಸ್ಥಾನದಲ್ಲಿದೆ. ಇದು ಅತ್ಯಂತ ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಸವಾಲ್ ಆಗಿ ಸ್ವೀಕರಿಸಿ ನೊಂದಣಿ ಕಾರ್ಯ:
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಎಲ್ಲಾ ಬ್ಯಾಂಕುಗಳ ಶಾಖೆಗಳವಾರು ಸಾಮಾಜಿಕ ಭದ್ರತಾ ಯೋಜನೆಯಡಿ ನೋಂದಣಿ ಅರ್ಹವಾದವರ ಪಟ್ಟಿ ನೀಡಿದರೆ, ಕೆಲವೇ ಗಂಟೆಗಳಲ್ಲಿ ಗ್ರಾಮವಾರು ಪಟ್ಟಿ ಸಿದ್ದಪಡಿಸಿ ಜಿಲ್ಲಾ ಪಂಚಾಯಿತಿ ವತಿಯಿಂದಲೇ ಈ ಕಾರ್ಯವನ್ನು ಸವಾಲ್ ಆಗಿ ಸ್ವೀಕರಿಸಿ ನೋಂದಣಿ ಕಾರ್ಯ ಮಾಡಲಾಗುವುದು. ಬ್ಯಾಂಕ್ ಅಧಿಕಾರಿಗಳಲ್ಲಿ ಸಾರ್ವಜನಿಕರಿಗೆ ಉತ್ತರದಾಯಿತ್ವದಿಂದ ಕೆಲಸ ಮಾಡಬೇಕು ಎಂಬ ಮನೋಭಾವವಿಲ್ಲ. ರಾಜ್ಯ ಸರ್ಕಾರಿ ನೌಕರರು ಎಸ್.ಐ.ಆರ್, ಗಣತಿ ಕಾರ್ಯಗಳ ನಡುವೇ ಈ ಕೆಲಸವನ್ನು ಸಹ ದಕ್ಷತೆಯಿಂದ ಮಾಡಬಲ್ಲರು. ಮುಂದಿನ ರಾಜ್ಯ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲೆಯ ಬ್ಯಾಂಕುಗಳ ಕಾರ್ಯವೈಖರಿ ಬಗ್ಗೆ ಧ್ವನಿ ಎತ್ತುವುದಾಗಿ ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸುವುದಾಗಿ ಸಿಇಓ ಡಾ. ಆಕಾಶ್ ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 16,59,456 ಜನಸಂಖ್ಯೆಯಿದ್ದು, ಪಿಎಂ-ಜೆಜೆಬಿವೈ 2,34,613, ಪಿಎಂ-ಎಸ್ಬಿವೈ ಅಡಿ 5,42,528 ಹಾಗೂ ಎಪಿವೈ ಅಡಿ 1,42,655 ಜನರು ನೊಂದಣಿಯಾಗಿದ್ದಾರೆ. ಪ್ರತಿ ಲಕ್ಷ ಜನರಿಗೆ ಪಿಎಂ-ಜೆಜೆಬಿವೈ ಅಡಿ 14,215, ಪಿಎಂ-ಎಸ್ಬಿವೈ ಅಡಿ 32,693 ಹಾಗೂ ಎಪಿವೈ ಅಡಿ 8,596 ನೊಂದಣಿಯಿದೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್.ಎಂ.ಪಿ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 259 ಬ್ಯಾಂಕ್ ಶಾಖೆಗಳು ಇದ್ದು, ಒಟ್ಟು ರೂ.12,431 ಕೋಟಿ ಠೇವಣಿ ಸಂಗ್ರಹಿಸಲಾಗಿದೆ. ಒಟ್ಟು ರೂ.14,695.81 ಕೋಟಿ ಸಾಲ ನೀಡಲಾಗಿದೆ. ಜಿಲ್ಲೆಯ ಒಟ್ಟಾರೆ ಠೇವಣಿ ಹಾಗೂ ಸಾಲ ಅನುಪಾತ ಶೇ.118.22 ರಷ್ಟಿದೆ. 2025-26 ಸಾಲಿಗೆ ಕೃಷಿ, ಶಿಕ್ಷಣ, ವಸತಿ, ಸಣ್ಣ ಹಾಗೂ ಅತಿಸಣ್ಣ ಉದ್ದಿಮೆ ಸೇರಿದಂತೆ ಆದ್ಯತಾ ವಲಯಗಳಿಗೆ ರೂ.9783.59 ಕೋಟಿ ಸಾಲ ನೀಡುವ ಗುರಿಯನ್ನು ಮೀರಿ ರೂ.11,191.90 ಕೋಟಿ ಸಾಲ ನೀಡಲಾಗಿದೆ.
ಎನ್.ಆರ್.ಎಲ್.ಎಂ (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ) ಅಡಿ 6,766 ಸ್ವ-ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡಲು ಗುರಿ ನಿಗದಿಪಡಿಸಲಾಗದೆ. ಒಟ್ಟು 5,284 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 5167 ಎಸ್.ಹೆಚ್.ಜಿ ಗಳಿಗೆ ಈಗಾಗಲೇ ಸಾಲ ಸೌಲಭ್ಯ ನೀಡಲಾಗಿದೆ. 91 ಅರ್ಜಿಗಳು ಬಾಕಿದ್ದು, ಯಾವುದೇ ಅರ್ಜಿಗಳನ್ನು ತಿರಸ್ಕರಿಸಿರುವುದಿಲ್ಲ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್.ಎಂ.ಪಿ ಮಾಹಿತಿ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಮಾತನಾಡಿ, ಪಿ.ಎಂ.ಎಫ್.ಎಂ.ಇ (ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣ ಉದ್ದಿಮೆಗಳ ಔಪಚಾರಿಕರಣ) ಅಡಿ ಜಿಲ್ಲೆಯಲ್ಲಿ 100 ಘಟಕಗಳಿಗೆ ಸಾಲ ಸೌಲಭ್ಯ ನೀಡಲು ಗುರಿ ನಿಗದಿ ಮಾಡಲಾಗಿದೆ. 167 ಅರ್ಜಿಗಳು ಸ್ವೀಕೃತವಾಗಿವೆ. ಇದುವರೆಗೆ 69 ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. 59 ಅರ್ಜಿಗಳು ಬಾಕಿಯಿವೆ. 39 ಅರ್ಜಿಯನ್ನು ತಿರಸ್ಕರಿಸಲಾಗಿದೆ. ಮಾರ್ಚ್ನಿಂದ ಯಾವುದೇ ಅರ್ಜಿಗಳಿಗೆ ಬ್ಯಾಂಕ್ ಮಂಜೂರಾತಿ ದೊರೆತಿಲ್ಲ. ಬ್ಯಾಂಕ್ ಅಧಿಕಾರಿಗಳು ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಕೋರಿದರು.
ಸರ್ಕಾರದ ಉದ್ಯೋಗ, ಉದ್ದಿಮೆ, ಸಾಲ ಸೌಲಭ್ಯ ಯೋಜನೆಗಳಿಗೆ ಸಲ್ಲಿಸುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಮಂಜೂರಾತಿ ನೀಡಬೇಕು. ಪಿ.ಎಂ.ಎಫ್.ಎಂ.ಇ ಅಡಿ ಕರ್ನಾಟಕ ಗ್ರಾಮೀಣ ಬ್ಯಾಂಕ್ 18, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 15 ಹಾಗೂ ಕೆನರಾ ಬ್ಯಾಂಕ್ 16 ಅರ್ಜಿಗಳು ಬಾಕಿ ಉಳಿಸಿಕೊಂಡಿವೆ. ಇತರೆ ಬ್ಯಾಂಕ್ಗಳಲ್ಲಿ ಒಂದು ಅಥವಾ ಎರಡು ಅರ್ಜಿಗಳು ಬಾಕಿಯಿವೆ. ಈ ಎಲ್ಲಾ ಅರ್ಜಿಗಳು ಮುಂದಿನ ಸಭೆಯ ವೇಳೆಗೆ ವಿಲೇವಾರಿಯಾಗಿರಬೇಕು. ಸರ್ಕಾರ ವಿವಿಧ ನಿಗಮ ಮಂಡಳಿಗಳ ವ್ಯವಸ್ಥಾಪಕರು ಬ್ಯಾಂಕುಗಳ ಮಂಜೂರಾತಿಗಾಗಿ ಸಲ್ಲಿಸಿದ ಅರ್ಜಿ ವಿವರಗಳ ಪ್ರತಿಯನ್ನು ಸಂಬಂದಪಟ್ಟ ಬ್ಯಾಂಕುಗಳ ವಲಯ ಕಚೇರಿಗಳ ವ್ಯವಸ್ಥಾಪಕರಿಗೆ ನೀಡಿದರೆ, ಶೀಘ್ರವಾಗಿ ಅರ್ಜಿಗಳ ಮಂಜೂರಾತಿ ಸಾಧ್ಯವಾಗುತ್ತದೆ ಎಂದು ಸಿಇಓ ಡಾ. ಆಕಾಶ್ ಹೇಳಿದರು.
ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ವಾರ್ಷಿಕ ಸಾಲ ಯೋಜನೆ 2026-27 ಕೈಪಿಡಿಯನ್ನು ಅನಾವರಣಗೊಳಿಸಲಾಯಿತು.
ಆರ್.ಬಿ.ಐ. ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ವಿನ್ನತ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ರಾಘವೇಂದ್ರ.ಎಂ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಜಗನಾಥ್ ಸೇರಿದಂತೆ ಬ್ಯಾಂಕುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
