ದಾವಣಗೆರೆ ಕಾಂಗ್ರೆಸ್‌ಗೆ ಬಿಗ್ ಶಾಕ್: ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಸಿಗದಿದ್ದರೆ ತಕ್ಕ ಪಾಠ! ಮುಸ್ಲಿಂ ಮುಖಂಡರ ಎಚ್ಚರಿಕೆ

ದಾವಣಗೆರೆ ಮುಸ್ಲಿಂ ಮುಖಂಡ ಅಮಾನುಲ್ಲಾ ಖಾನ್ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡುತ್ತಿರುವುದು
— ದಾವಣಗೆರೆ: "ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ತಕ್ಕ ಪಾಠ ಕಲಿಸುತ್ತೇವೆ" ಎಂದು ಎಚ್ಚರಿಸಿದ ಮುಸ್ಲಿಂ ಮುಖಂಡ ಅಮಾನುಲ್ಲಾ ಖಾನ್.

—Election Update—

ದಾವಣಗೆರೆ: ಜಿಲ್ಲೆಯ ರಾಜಕೀಯ ವಲಯದಲ್ಲಿ ಈಗ ಉಪಚುನಾವಣೆಯ ಕಾವು ಏರತೊಡಗಿದೆ. ಪವಿತ್ರ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ನೇರ ಎಚ್ಚರಿಕೆ ನೀಡುವ ಮೂಲಕ ರಾಜಕೀಯ ಸಂಚಲನ ಮೂಡಿಸಿದ್ದಾರೆ.

​ನಗರದ ಪಿಬಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಸ್ಲಿಂ ಸಮುದಾಯದ ಮುಖಂಡ ಅಮಾನುಲ್ಲಾ ಖಾನ್, ಕಾಂಗ್ರೆಸ್ ಹೈಕಮಾಂಡ್ ನಿಲುವಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್‌ಗೆ ಕಾದಿದೆ ಸಂಕಷ್ಟ!

​”ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಸಿಗಬಹುದು ಎಂಬ ಆಶಾಭಾವನೆ ನಮಗಿದೆ. ಒಂದು ವೇಳೆ ಸಮುದಾಯಕ್ಕೆ ಅನ್ಯಾಯವಾಗಿ ಟಿಕೆಟ್ ಕೈತಪ್ಪಿದರೆ, ನಾಳೆ ಸಂಜೆ ಸಮುದಾಯದ ಪ್ರಮುಖರ ಸಭೆ ಕರೆದು ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನಿಶ್ಚಿತ” ಎಂದು ಅಮಾನುಲ್ಲಾ ಖಾನ್ ಗುಡುಗಿದ್ದಾರೆ.

30 ವರ್ಷಗಳ ಬೆಂಬಲಕ್ಕೆ ಸಿಗದ ನ್ಯಾಯ?

​ಕಳೆದ ಮೂರು ದಶಕಗಳಿಂದ ಮುಸ್ಲಿಂ ಸಮುದಾಯವು ಒಂದು ನಿರ್ದಿಷ್ಟ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದೆ. ಆದರೆ ಅಧಿಕಾರ ಹಂಚಿಕೆಯ ವಿಷಯದಲ್ಲಿ ಸಮುದಾಯಕ್ಕೆ ಸತತವಾಗಿ ಅನ್ಯಾಯವಾಗುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ನಾವು ಈಗ ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಇದೆ. ಇದು ಕೇವಲ ಒಂದು ಕ್ಷೇತ್ರದ ಚುನಾವಣೆಯಲ್ಲ, ಬದಲಿಗೆ ಇಡೀ ರಾಜ್ಯದ ಮುಸ್ಲಿಂ ಮತದಾರರ ರಾಜಕೀಯ ದಿಕ್ಸೂಚಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

1994ರ ಇತಿಹಾಸ ಮರುಕಳಿಸುತ್ತಾ?

​1992ರಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾದಾಗ 1994ರ ಚುನಾವಣೆಯಲ್ಲಿ ಮತದಾರರು ತಮ್ಮ ಪಥ ಬದಲಿಸಿದ್ದರು. ಅದರ ಪರಿಣಾಮವಾಗಿ ಅಂದು ಜನತಾದಳ ಅಧಿಕಾರಕ್ಕೆ ಬಂದಿತ್ತು. ಈಗಲೂ ಅಂತಹದ್ದೇ ವಾತಾವರಣ ನಿರ್ಮಾಣವಾಗುವ ಲಕ್ಷಣಗಳು ಕಾಣುತ್ತಿವೆ. ಸಮುದಾಯಕ್ಕೆ ನ್ಯಾಯ ಸಿಗದಿದ್ದರೆ ಜನರು ತಮ್ಮ ನಿರ್ಧಾರವನ್ನು ಬದಲಿಸುವುದು ಖಚಿತ ಎಂದು ಅವರು ಎಚ್ಚರಿಸಿದ್ದಾರೆ.

​ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಹಂಚಿಕೆ ಈಗ ದೆಹಲಿ ಅಂಗಳ ತಲುಪಿದ್ದು, ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Leave a Comment

Home
Web Stories
Instagram
WhatsApp