ದಾವಣಗೆರೆ: ಬಂಜಾರ ಸಮುದಾಯದ ಆರಾಧ್ಯ ದೈವ, ದಕ್ಷಿಣ ಭಾರತದ ‘ಬಂಜಾರ ಕಾಶಿ’ ಎಂದೇ ಪ್ರಸಿದ್ಧಿ ಪಡೆದಿರುವ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆಬ್ರವರಿ 13 ರಿಂದ 15 ರವರೆಗೆ ಶ್ರೀ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ನಡೆಸಲಾಗಿದೆ.
ಈ ಕುರಿತು ವಿಧಾನಸಭೆ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅಧಿಕೃತ ಮಾಹಿತಿ ನೀಡಿದರು.
ಮುಖ್ಯಮಂತ್ರಿಗಳಿಂದ ಚಾಲನೆ
ಫೆಬ್ರವರಿ 14ರಂದು ನಡೆಯುವ ಪ್ರಮುಖ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದು, ಮಧ್ಯಾಹ್ನ 2.30ಕ್ಕೆ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಗಣ್ಯರ ದಂಡು
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ ಹಾಗೂ ರಾಜ್ಯದ ಪ್ರಮುಖ ಸಚಿವರಾದ ಎಚ್.ಕೆ. ಪಾಟೀಲ್, ಡಾ. ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಹಲವು ಗಣ್ಯರು ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭಾಗವಹಿಸಲಿದ್ದಾರೆ ಎಂದು ಲಮಾಣಿ ತಿಳಿಸಿದರು.
3 ದಿನಗಳ ಭಕ್ತಿ ಸಂಭ್ರಮ ಹೀಗಿರಲಿದೆ:
ಉತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
-
ಫೆಬ್ರವರಿ 13 (ಮೊದಲ ದಿನ): ಬೆಳಗ್ಗೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ತಾಂಡಾ ಸಾಂಪ್ರದಾಯಿಕ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು, ಸತ್ಸಂಗ ಹಾಗೂ ಭಜನೆಗಳು ನಡೆಯಲಿವೆ.
-
ಫೆಬ್ರವರಿ 14 (ಎರಡನೇ ದಿನ): ಬೆಳಗ್ಗೆ ಪೂರ್ಣಕುಂಭ ಮೆರವಣಿಗೆ, ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಮೂರ್ತಿಗೆ ಅಭಿಷೇಕ, ಅಲಂಕಾರ, ಉಭಯ ದೇವಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಮಹಾಮಂಗಳಾರತಿ ಹಾಗೂ ಪಲ್ಲಕ್ಕಿ ಉತ್ಸವ ನಡೆಯಲಿದೆ. ಮಾಲಾಧಾರಿಗಳಿಂದ ‘ಇರಿಮುಡಿ’ ಸಮರ್ಪಣೆ ವಿಶೇಷ ಆಕರ್ಷಣೆಯಾಗಿರಲಿದೆ.
-
ಫೆಬ್ರವರಿ 15 (ಅಂತಿಮ ದಿನ): ಬೆಳಗ್ಗೆ ಮಹಾಭೋಗ್, ಪೂಜೆ, ದರ್ಶನ ಮತ್ತು ಸಂಪ್ರದಾಯದಂತೆ ‘ತೀಜ್ ವಿಸರ್ಜನೆ’ಯ ಮೂಲಕ ಜಯಂತ್ಯುತ್ಸವಕ್ಕೆ ತೆರೆ ಬೀಳಲಿದೆ.
- ಶೈಕ್ಷಣಿಕ ಕೇಂದ್ರವಾಗಲಿದೆ ಸೂರಗೊಂಡನಕೊಪ್ಪ: ಕೇವಲ ಧಾರ್ಮಿಕ ಕೇಂದ್ರವಷ್ಟೇ ಅಲ್ಲದೆ, ಸೂರಗೊಂಡನಕೊಪ್ಪವನ್ನು ‘ಎಜುಕೇಷನ್ ಹಬ್’ ಆಗಿ ರೂಪಿಸಲಾಗುತ್ತಿದೆ ಎಂದು ರುದ್ರಪ್ಪ ಲಮಾಣಿ ತಿಳಿಸಿದರು. ಈಗಾಗಲೇ ಐಟಿಐ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ವಲಸೆ ಕಾರ್ಮಿಕರ ಮಕ್ಕಳಿಗಾಗಿ 1ನೇ ತರಗತಿಯಿಂದ ಪಿಯುಸಿವರೆಗೆ ವಸತಿಯುತ ಶಾಲೆ ಆರಂಭಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಮುಂದಿನ ದಿನಗಳಲ್ಲಿ ಪದವಿ ಕಾಲೇಜು ಸ್ಥಾಪಿಸುವ ಚಿಂತನೆಯೂ ಇದೆ ಎಂದರು.
ಭಕ್ತರಿಗೆ ಸಕಲ ವ್ಯವಸ್ಥೆ
ರಾಜ್ಯದ ಮೂಲೆಮೂಲೆಗಳಿಂದ ಆಗಮಿಸುವ ಲಕ್ಷಾಂತರ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಊಟ, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಬಂಜಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯ್ಕ, ಸಮಿತಿಯ ಪದಾಧಿಕಾರಿಗಳಾದ ಎನ್. ಹನುಮಂತ ನಾಯ್ಕ, ನರೇನಹಳ್ಳಿ ಅರುಣ್ ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
madhayakarnatakalive@gmail.com
